‘ಹಳೇ ಪಿಂಚಣಿ ಸಾಧ್ಯವಿಲ್ಲ – ಕೆಲಸಕ್ಕೆ ಸೇರುವಾಗಲೇ ಇದಕ್ಕೆ ಒಪ್ಪಿದ್ದೀರಿ’

ಬೆಳಗಾವಿ ಅಧಿವೇಶನದ ಕೊನೆಯ ದಿನದಲ್ಲಿ ನಡೆದ ಚರ್ಚೆಯಲ್ಲಿ ಆಡಳಿತ ಪಕ್ಷಗಳ ಸದಸ್ಯರು ಸೇರಿದಂತೆ ಹಲವರು ಸಭಾತ್ಯಾಗ

ಬೆಳಗಾವಿ, ಡಿ.29: ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವ ಪ್ರಸ್ತಾವನೆ ನಮ್ಮ ಸರ್ಕಾರದ ಮುಂದಿಲ್ಲ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರ ಹೇಳಿಕೆಯನ್ನು ವಿರೋಧಿಸಿ ಆಡಳಿತ ಪಕ್ಷಗಳ ಸದಸ್ಯರು ಸೇರಿದಂತೆ ಹಲವರು ಸಭಾತ್ಯಾಗ ನಡೆಸಿದ ಪ್ರಸಂಗ ವಿಧಾನ ಪರಿಷತ್ನಲ್ಲಿ ನಡೆಯಿತು.

ಪ್ರಶ್ನೋತ್ತರದ ಅವಧಿಯಲ್ಲಿ ತಳವಾರ್ ಸಾಬಣ್ಣ, 2006ರ ನಂತರ ನೇಮಕವಾದ ರಾಜ್ಯ ಸರ್ಕಾರಿ ನೌಕರರಿಗೆ ಜಾರಿಯಲ್ಲಿರುವ ಹೊಸ ಪಿಂಚಣಿ ಯೋಜನೆ (ಎನ್ ಪಿಎಸ್) ಅನ್ನು ಹಳೆ ಪಿಂಚಣಿ (ಓಪಿಎಸ್) ಗೆ ಪರಿವರ್ತನೆ ಮಾಡುವ ಕುರಿತು ಸರ್ಕಾರದ ನಿಲುವೇನು ಎಂದು ಪ್ರಶ್ನಿಸಿದರು.

ಇದಕ್ಕೆ ಮುಖ್ಯಮಂತ್ರಿಯವರ ಪರವಾಗಿ ಉತ್ತರಿಸಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ, 2004ರಲ್ಲಿ ಕೇಂದ್ರ ಸರ್ಕಾರ ಪಿಂಚಣಿ ಕೊಡೋಕೆ ಆಗಲ್ಲ ಎಂದು ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ನಂತರ 2006ರಲ್ಲಿ ರಾಜ್ಯ ಸರ್ಕಾರಗಳು ಅದನ್ನು ಜಾರಿ ಮಾಡಿವೆ ಎಂದರು.

ಸರ್ಕಾರಿ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುವ ಹಂತದಲ್ಲಿ ಹೊರಡಿಸಲಾದ ಅಧಿಸೂಚನೆಯಲ್ಲಿ ಹೊಸ ಪಿಂಚಣಿ ಯೋಜನೆ ಅಳವಡಿಕೆಯಾಗಿರುವ ಕುರಿತು ಮಾಹಿತಿ ನೀಡಲಾಗಿದೆ. ಹಳೆ ಪಿಂಚಣಿ ವ್ಯವಸ್ಥೆ ಕೇಳಬಾರದು ಎಂಬ ಷರತ್ತನ್ನು ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ. ಅದನ್ನು ಒಪ್ಪಿಕೊಂಡೇ ಸೇವೆಗೆ ಸೇರಿರುತ್ತಾರೆ. ಅದನ್ನು ಮರೆತು ಈಗ ಹಳೆ ಪಿಂಚಣಿ ಕೇಳುವುದು ಕಾನೂನು ಸಚಿವರಾಗಿ ನನಗೆ ಸರಿ ಅನಿಸುತ್ತಿಲ್ಲ. ಸರ್ಕಾರಿ ನೌಕರರಿಗೆ ಅದು ಸೌಜನ್ಯವೂ ಅಲ್ಲ ಎಂದರು.

ರಾಜ್ಯ ಸರ್ಕಾರಿ ನೌಕರಿಗೆ ವಾರ್ಷಿಕ 70 ರಿಂದ 80 ಸಾವಿರ ಕೋಟಿ ರೂಪಾಯಿ ನೀಡಲಾಗುತ್ತಿದೆ. ಪಿಂಚಣಿಗಾಗಿಯೇ ಪ್ರತಿ ತಿಂಗಳು 24 ಕೋಟಿಯಷ್ಟು ಖರ್ಚಾಗುತ್ತಿದೆ. ಸದ್ಯದ ಆರ್ಥಿಕ ಪರಿಸ್ಥಿತಿಯಲ್ಲಿ ಹಳೆ ಪಿಂಚಣಿ ನೀಡುವುದು ಕಷ್ಟ.

ಹೊಸ ಪಿಂಚಣಿ ಜಾರಿಗೊಳಿಸುವ ಆಲೋಚನೆ ನಮ್ಮ ಸರ್ಕಾರದ ಮುಂದೆ ಇಲ್ಲ. ಆದರೂ ವಿಧಾನಸಭೆಯಲ್ಲಿ ಚರ್ಚೆ ನಡೆದ ವೇಳೆಗೆ ಹಣಕಾಸಿನ ಪರಿಸ್ಥಿತಿ ನೋಡಿಕೊಂಡು ಓಪಿಎಸ್ ತರಬಹುದಾ ಎಂದು ನೋಡುತ್ತೇವೆ ಎಂದು ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ. ಅದಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ. ಹಣಕಾಸು ಇಲಾಖೆಯೊಂದಿಗೆ ಚರ್ಚಿಸಿ, ಹಣಕಾಸು ಲಭ್ಯತೆ ಆಧರಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಅಥವಾ ಸಭೆ ನಡೆಸಲಾಗುವುದು ಎಂದರು.

ಇದಕ್ಕೆ ಕಾಂಗ್ರೆಸ್ನ ಪ್ರಕಾಶ್ ಹುಕ್ಕೇರಿ ತೀವ್ರ ಆಕ್ಷೇಪ ವ್ಯಕ್ತ ಪಡಿಸಿದರು. ಬೆಂಗಳೂರಿನಲ್ಲಿ ಶಿಕ್ಷಕರು ಸೇರಿದಂತೆ ಸರ್ಕಾರಿ ನೌಕರರು ಉಪವಾಸ ಧರಣಿ ಸತ್ಯಾಗ್ರಹ ನಡೆಸುತ್ತಿದ್ದಾರೆ. ಕಳೆದ ವಾರ ಇದೇ ಸುವರ್ಣಸೌಧದಲ್ಲಿ ನಡೆದ ಸಭೆಯಲ್ಲಿ ಹೊಸ ಸಮಿತಿ ರಚನೆ ಮಾಡಿ ಪರಿಶೀಲಿಸುತ್ತೇವೆ ಎಂದು ಮುಖ್ಯಮಂತ್ರಿ ಭರವಸೆ ನೀಡಿದ್ದರು. ಈಗ ಸಚಿವರು ಆಗಲ್ಲ ಎಂದು ಸ್ಪಷ್ಟವಾಗಿ ಹೇಳುತ್ತಿದ್ದಾರೆ. ಇದು ಸದನದ ಹೊರಗೆ ಬೇರೆ ಸಂದೇಶ ಹೋಗುತ್ತದೆ. ಪ್ರಚೋದನೆಗೆ ಕಾರಣವಾಗುತ್ತದೆ ಎಂದು ಹೇಳಿದರು.

ಇದು ಜೆ.ಸಿ.ಮಾಧುಸ್ವಾಮಿ ಮತ್ತು ಪ್ರಕಾಶ್ ಹುಕ್ಕೇರಿ ನಡುವೆ ಮಾತಿನ ಚಕಮಕಿಗೆ ಕಾರಣವಾಯಿತು. ಪ್ರಚೋದನೆ ನೀಡುತ್ತಿರುವವರು ನೀವು. ಈ ವಿಷಯದಲ್ಲಿ ರಾಜಕಾರಣ ಮಾಡುತ್ತಿದ್ದೀರಾ. ನಿಮ್ಮದೇ ಸರ್ಕಾರ ಎನ್ಪಿಎಸ್ ಜಾರಿಗೊಳಿಸುವ ನಿರ್ಧಾರ ತೆಗೆದುಕೊಂಡಿದ್ದು ಎಂದು ಮಾಧುಸ್ವಾಮಿ ತಿರುಗೇಟು ನೀಡಿದರು.

ಸರ್ಕಾರ ಯಾವುದಾದರೂ ಏನು ನಿಮ್ಮ ಕಾಲದಲ್ಲಿ ಬದಲಾವಣೆ ಮಾಡಿ. ಆಗುವುದಿಲ್ಲ ಎಂದಾದರೆ ಕಳೆದ ಸಭೆಯಲ್ಲಿ ಸಮಿತಿ ರಚನೆ ಮಾಡಲು ಒಪ್ಪಿಕೊಂಡಿದ್ದೇಕೆ ಎಂದು ಪ್ರಶ್ನಿಸಿದ ಪ್ರಕಾಶ್ ಹುಕ್ಕೇರಿ, ಹಳೆ ಪಿಂಚಣಿ ಜಾರಿಯಿಂದ ಸುಮಾರು 52 ಕೋಟಿ ರೂಪಾಯಿ ಮಾತ್ರ ಹೆಚ್ಚುವರಿ ಹೊರೆಯಾಗುತ್ತದೆ. ಸರ್ಕಾರ ಸ್ಪಷ್ಟ ನಿರ್ಧಾರಕ್ಕೆ ಬರಬೇಕು ಎಂದು ಒತ್ತಾಯಿಸಿದರು. ಈ ಹಿಂದೆ ಸಮಿತಿ ರಚನೆಯಾಗಿದ್ದ ಸಮಿತಿ ನಿಷ್ಕ್ರೀಯವಾಗಿದೆ ಎಂದು ಆಕ್ಷೇಪಿಸಿದರು.

ಆಡಳಿತ ಪಕ್ಷದ ಸದಸ್ಯ ಎಸ್.ವಿ.ಸಂಕನೂರು, ಸರ್ಕಾರದಲ್ಲಿ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತರಾದವರು ಹೊಸ ಪಿಂಚಣಿ ವ್ಯವಸ್ಥೆಯಿಂದ ಅತ್ಯಲ್ಪ ಪ್ರಮಾಣದ ಪರಿಹಾರ ಪಡೆಯುತ್ತಿದ್ದಾರೆ. ಅದರಲ್ಲಿ ನಿವೃತ್ತರು ಜೀವನ ನಡೆಸುವುದು ಕಷ್ಟವಾಗಲಿದೆ. ಸರ್ಕಾರ ಹಳೆ ಪಿಂಚಣಿ ವ್ಯವಸ್ಥೆಯನ್ನು ಜಾರಿಗೆ ತರಬೇಕು. ನೇಮಕಾತಿ ವೇಳೆ ಅರ್ಜಿ ಹಾಕಿದವರಿಗೆ ಸರಿಯಾದ ಮಾಹಿತಿ ಇರಲಿಲ್ಲ ಎಂದರು.

admin

admin

Leave a Reply

Your email address will not be published. Required fields are marked *

error: Content is protected !!