ಅತಿವೃಷ್ಠಿ: ಇಂದು (ಜು.8) ಮಧ್ಯಾಹ್ನ 2.30 ಕ್ಕೆ ಅಧಿಕಾರಿಗಳೊಂದಿಗೆ ಸಿಎಂ ಸಭೆ

ಸುದ್ದಿ360, ಬೆಂಗಳೂರು, ಜು.08: ರಾಜ್ಯದಲ್ಲಿ ಅತಿಯಾಗಿ ಸುರಿಯುತ್ತಿರುವ ಮಳೆ ಹಾಗೂ ಪ್ರಕೃತಿ ವಿಕೋಪ ಹಿನ್ನೆಲೆಯಲ್ಲಿಇಂದು ಶುಕ್ರವಾರ ಮಧ್ಯಾಹ್ನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯದ 13  ಜಿಲ್ಲೆಗಳ ಉಸ್ತುವಾರಿ ಹಾಗೂ ಸಂಬಂಧಪಟ್ಟ ಇಲಾಖೆಗಳ ಸಚಿವರು, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಸಿ ಇ ಒ ಮತ್ತು ಇತರೆ ಅಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್  ಕರೆದಿದ್ದಾರೆ.

ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಮಧ್ಯಾಹ್ನ 2:30ಕ್ಕೆ ಸಭೆ ಕರೆಯಲಾಗಿದ್ದು, ಸಭೆಯಲ್ಲಿ ಯಾವ ಯಾವ ಜಿಲ್ಲೆಗಳಲ್ಲಿ ಎಷ್ಟು ಮಳೆಯಾಗಿದೆ? ಎಷ್ಟು ಹಾನಿಯಾಗಿದೆ? ಈಗಾಗಲೇ ಕೈಗೊಳ್ಳಲಾಗಿರುವ ತುರ್ತು ಕ್ರಮಗಳೇನು ಎಂಬುದರ ಕುರಿತು ಸಿಎಂ ಮಾಹಿತಿ ಪಡೆದು ಸೂಕ್ತ ನಿರ್ದೇಶನ ನೀಡಲಿದ್ದಾರೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಸುರಿಯುತ್ತಿರುವ ಮಳೆ ಮತ್ತು ಅದರಿಂದ ಉಂಟಾಗಿರುವ ಹಾನಿ ಕುರಿತು ಮಾಹಿತಿ ಪಡೆಯಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅತಿ ಹೆಚ್ಚು ಮಳೆ ಆಗಿರುವ 13 ಜಿಲ್ಲೆಗಳ ಡಿಸಿ ಮತ್ತು ಸಿಇಒ ಗಳ ಸಭೆ ಕರೆದಿದ್ದಾರೆ.

ಸಭೆಯಲ್ಲಿ ಭಾಗವಹಿಸಲಿರುವ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರು, ಕಂದಾಯ, ಗೃಹ ಸೇರಿದಂತೆ ಸಂಬಂಧಪಟ್ಟ ಇಲಾಖೆಗಳ ಸಚಿವರು ಮತ್ತು ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಲಿದ್ದಾರೆ.

Leave a Comment

error: Content is protected !!